ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯ ವಿವರ: ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಮೊಹಮ್ಮದ ಅಸ್ಪಾಕ್ (ತಂದೆ: ಜಹೀರ್ ಅಹಮ್ಮದ ಶೇಖ್) ಎಂದು ಗುರುತಿಸಲಾಗಿದೆ.
ಈತ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಹಳೆಯ ಪ್ರಕರಣವೊಂದರಲ್ಲಿ ಈ ಹಿಂದೆ ಜಾಮೀನು ಪಡೆದು ಹೊರಬಂದಿದ್ದನು. ಆದರೆ, ಜಾಮೀನು ಪಡೆದ ನಂತರ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಈತನ ವಿರುದ್ಧ ಸ್ಪೆಷಲ್ ಕೇಸ್ ವಾರಂಟ್ ಜಾರಿಗೊಳಿಸಿತ್ತು.
ಆರೋಪಿಯ ಪತ್ತೆಗಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು. ಖಚಿತ ಮಾಹಿತಿಯ ಆಧಾರದ ಮೇಲೆ ಕೇರಳ ಮೂಲದ ಈತನನ್ನು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಯನ್ನು ಇಂದು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯ ಪಿ.ಎಸ್.ಐ ಬಸವರಾಜ ಕನಕಶೆಟ್ಟಿ, ಪೊಲೀಸ್ ಸಿಬ್ಬಂದಿಗಳಾದ ಮೋಹನ ನಾಯ್ಕ, ವಿಶ್ವನಾಥ ಭಂಡಾರಿ, ಪ್ರದೀಪ ನಾಯಕ, ಅಶೋಕ ಹರಿಕಂತ್ರ ಹಾಗೂ ರಮೇಶ ಮುಚ್ಚಂಡಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಆರೋಪಿಯನ್ನು ಪತ್ತೆಹಚ್ಚಿದ ಇಡೀ ತಂಡಕ್ಕೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.