Share News

ಉತ್ತರ ಕನ್ನಡ: ಹಳಿಯಾಳದ ಬಾರ್‌ವೊಂದರಲ್ಲಿ ಮದ್ಯ ಸೇವಿಸಿ, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆಯೇ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಕುಖ್ಯಾತ ರೌಡಿ ಶೀಟರ್ ‘ಮಚ್ ಮಂಜ’ನನ್ನು ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟಿದ್ದಾರೆ. ಮಹಾರಾಷ್ಟ್ರದ ಗಡಿ ಜಿಲ್ಲೆಯೊಂದರಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಹಳಿಯಾಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಭಾನುವಾರ ಹಳಿಯಾಳ ನಗರದ ಮೌರ್ಯ ಬಾರ್‌ನಲ್ಲಿ ಈ ಘಟನೆ ನಡೆದಿತ್ತು. ಬಾರ್‌ಗೆ ಬಂದಿದ್ದ ರೌಡಿ ಶೀಟರ್ ಮಚ್ ಮಂಜ ವಿಪರೀತ ಮದ್ಯ ಸೇವಿಸಿ ಗಲಾಟೆ ಸೃಷ್ಟಿಸಿದ್ದ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ತಡೆಯಲು ಯತ್ನಿಸಿದಾಗ, ಕಾನೂನಿಗೂ ಕ್ಯಾರೆ ಎನ್ನದ ಆರೋಪಿ ಪೊಲೀಸ್ ಸಿಬ್ಬಂದಿಗಳ ಮೇಲೆಯೇ ತೀವ್ರವಾಗಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದ. ಪೊಲೀಸರ ಮೇಲೆಯೇ ರೌಡಿ ಶೀಟರ್ ದರ್ಪ ತೋರಿದ ಈ ಘಟನೆ ಇಲಾಖೆಯಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಹಳಿಯಾಳ ಪೊಲೀಸರು, ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ತೀವ್ರ ಜಾಲ ಬೀಸಿದ್ದರು. ಈ ವೇಳೆ ಆರೋಪಿ ಮಚ್ ಮಂಜ ಕರ್ನಾಟಕದ ಗಡಿ ದಾಟಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಖಚಿತ ಮಾಹಿತಿ ಲಭಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸ್ ತಂಡ ಮಹಾರಾಷ್ಟ್ರದ ಗಡಿ ಜಿಲ್ಲೆಗೆ ಧಾವಿಸಿ, ಅಡಗಿದ್ದ ಆರೋಪಿಯನ್ನು ಸುತ್ತುವರೆದು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ರೌಡಿ ಶೀಟರ್ ಮಚ್ ಮಂಜನನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳಕ್ಕೆ ಕರೆತಂದ ಪೊಲೀಸರು, ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗೆ ೧೪ ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಆದೇಶಿಸಿದ್ದಾರೆ. ಸದ್ಯ ಪೊಲೀಸರ ಮೇಲೆಯೇ ಕೈಮಾಡಿದ್ದ ರೌಡಿ ಶೀಟರ್ ಜೈಲು ಕಂಬಿ ಎಣಿಸುವಂತಾಗಿದ್ದು, ಹಳಿಯಾಳ ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

 


Share News