ಕಲಬುರಗಿ: ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನೊಬ್ಬನನ್ನು ಅಶೋಕ ನಗರ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂದಿತನಿಂದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ 117 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎರಡು ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸಲಾಗಿದೆ.
ತೆಲಂಗಾಣ ರಾಜ್ಯದ ಹೈದರಾಬಾದ್ ಮೂಲದ ಆಟೋ ಚಾಲಕ ಸೈಯದ್ ಹಮೀದ್ (46) ಬಂಧಿತ ಆರೋಪಿ.
ಮನೆ ಬೀಗ ಮುರಿದು ಕಳವು: ಕಳೆದ 29-05-2025 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 3:45 ರ ನಡುವೆ, ದೂರುದಾರರು ಹಾಗೂ ಅವರ ತಾಯಿ ಮನೆಯಲ್ಲ ಇಲ್ಲದ ಸಮಯ ನೋಡಿ ಖದೀಮ ಬಾಗಿಲ ಬೀಗ ಮುರಿದು ಒಳನುಗ್ಗಿದ್ದನು.
ದೂರು ಹಾಗೂ ಪ್ರಕರಣ ದಾಖಲು: ಬೆಡ್ರೂಮ್ನಲ್ಲಿದ್ದ ಅಲಮಾರುಗಳನ್ನು ಜಾಲಾಡಿ ನಗದು ಹಣ, ಬೆಳ್ಳಿ ಸಾಮಗ್ರಿಗಳು ಹಾಗೂ ಬಂಗಾರದ ಆಭರಣಗಳನ್ನು ದೋಚಿ ಪರಾರಿಯಾಗಿದ್ದನು. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ (ಗುನ್ನೆ ನಂ. 91/2025, BNS ಕಲಂ 331(4), 305) ಪ್ರಕರಣ ದಾಖಲಾಗಿತ್ತು.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ಮಾರ್ಗದರ್ಶನದಲ್ಲಿ, ಡಿಸಿಪಿಗಳಾದ ಶ್ರೀಮತಿ ಶಾಲೂ, ಪ್ರವೀಣ ಹೆಚ್. ನಾಯಕ್, ಎಸಿಪಿ ಶರಣಬಸಪ್ಪ ಸುಬೇದಾರ ಹಾಗೂ ಅಶೋಕ ನಗರ ಪಿಐ ಸತೀಶ ಕಣಿಮೇಶ್ವರ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ಸಿಡಿಆರ್ ಮತ್ತು ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು, ಆತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದಾಗ ಅಶೋಕ ನಗರ ಠಾಣೆಯ 02 ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿಯಿಂದ 20,00,000/- ಮೌಲ್ಯದ 117 ಗ್ರಾಂ ಚಿನ್ನದ ಆಭರಣಗಳನ್ನು ಜಪ್ತಿ ಮಾಡಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣವನ್ನು ಅತ್ಯಂತ ಚಾಣಾಕ್ಷತನದಿಂದ ಭೇದಿಸಿದ ತನಿಖಾ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವೈಖರಿಯನ್ನು ಮಾನ್ಯ ಪೊಲೀಸ್ ಆಯುಕ್ತರು ಪ್ರಶಂಸಿದ್ದಾರೆ.