ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಬರೋಬ್ಬರಿ 29 ಸಿಲಿಂಡರ್ಗಳನ್ನು ಜಪ್ತಿ ಮಾಡಿದ್ದಾರೆ.
ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸಾರ್ವಜನಿಕರಿಗೆ ಸಬ್ಸಿಡಿ ದರದಲ್ಲಿ ದೊರೆಯುವ ಗೃಹಬಳಕೆ ಸಿಲಿಂಡರ್ಗಳನ್ನು ಹೋಟೆಲ್ ಮತ್ತು ಢಾಬಾಗಳಲ್ಲಿ ಕಾನೂನುಬಾಹಿರವಾಗಿ ಬಳಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.
ಕಟ್ಟುನಿಟ್ಟಿನ ಎಚ್ಚರಿಕೆ:
ಗೃಹಬಳಕೆ ಸಿಲಿಂಡರ್ಗಳನ್ನು ವಾಣಿಜ್ಯ ಚಟುವಟಿಕೆಗೆ ಬಳಸುವುದು ಸಂಪೂರ್ಣ ನಿಯಮಬಾಹಿರ. ಹೋಟೆಲ್ ಹಾಗೂ ಢಾಬಾ ಮಾಲೀಕರು ಕಡ್ಡಾಯವಾಗಿ ಅಧಿಕೃತ ವಾಣಿಜ್ಯ (ಕಮರ್ಷಿಯಲ್) ಎಲ್ಪಿಜಿ ಸಿಲಿಂಡರ್ಗಳನ್ನೇ ಬಳಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಎಚ್ಚರಿಸಿದ್ದಾರೆ.
ಈ ದಾಳಿ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ಶಿರಸ್ತೆದಾರ ಹಣಮಂತ ಕಾಂಡೆಕರ, ಆಹಾರ ನಿರೀಕ್ಷಕಿ ಐಶ್ವರ್ಯ ದಿವಟೆ ಹಾಗೂ ಇಲಾಖೆಯ ಇತರ ಸಿಬ್ಬಂದಿ ಪಾಲ್ಗೊಂಡಿದ್ದರು.