ದಾವಣಗೆರೆ: ನಗರದಲ್ಲಿ ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕರ್ಕಶ ಶಬ್ದದ ಕಿರಿಕಿರಿ ಉಂಟುಮಾಡುತ್ತಿದ್ದ ಬೈಕ್ಗಳ ವಿರುದ್ಧ ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, 8 ಬುಲೆಟ್ ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶೇಖರ್ ಹೆಚ್.ಟಿ. (ಐಪಿಎಸ್) ಅವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ನಗರ ಡಿವೈಎಸ್ಪಿ ಶರಣಬಸವೇಶ್ವರ ಹಾಗೂ ಸಂಚಾರ ವೃತ್ತ ನಿರೀಕ್ಷಕ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಮಹಾದೇವ ಭತ್ತೆ ಹಾಗೂ ಸಿಬ್ಬಂದಿಗಳ ತಂಡ ಈ ದಿಢೀರ್ ದಾಳಿ ನಡೆಸಿದೆ.
ಸೈಲೆನ್ಸರ್ ತೆರವು ಮತ್ತು ಕಟ್ಟುನಿಟ್ಟಿನ ಎಚ್ಚರಿಕೆ:
ವಶಪಡಿಸಿಕೊಂಡ ಎಲ್ಲಾ 8 ಬುಲೆಟ್ ಬೈಕ್ಗಳಲ್ಲಿದ್ದ ದೋಷಪೂರಿತ ಸೈಲೆನ್ಸರ್ಗಳನ್ನು ಪೊಲೀಸರು ಸ್ಥಳದಲ್ಲೇ ತೆರವುಗೊಳಿಸಿ, ಸಂಚಾರ ನಿಯಮ ಉಲ್ಲಂಘನೆಯಡಿ ದಂಡ ವಿಧಿಸಿದ್ದಾರೆ.
ಒಮ್ಮೆ ದಂಡ ತೆತ್ತ ನಂತರವೂ ಮತ್ತೆ ನಿಯಮ ಮೀರಿ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಸಂಚರಿಸಿದರೆ, ಭಾರತೀಯ ಮೋಟಾರು ವಾಹನ ಕಾಯ್ದೆ ಕಲಂ 190(2) ರಂತೆ ನೇರವಾಗಿ ಪ್ರಕರಣ ದಾಖಲಿಸಲಾಗುವುದು. ಈ ಅಪರಾಧಕ್ಕೆ 3 ತಿಂಗಳ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಲು ಅವಕಾಶವಿದ್ದು, ಬೈಕ್ ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕೆಂದು ಪೊಲೀಸರು ಎಚ್ಚರಿಸಿದ್ದಾರೆ.